ನವದೆಹಲಿ: ನಿನ್ನೆ ಎನ್ ಡಿಎ ರಾಷ್ಟ್ರಪತಿ ಅಭ್ಯರ್ಥಿ ರಾಮ್ ನಾಥ್ ಕೋವಿಂದ್ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದ ಬಿಹಾರ ಮುಖ್ಯಮಂತ್ರಿ, ಜೆಡಿಯು ನಾಯಕ ನಿತೀಶ್ ಕುಮಾರ್ ಇಂದು ಉಪ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುತ್ತಿರುವ ಯುಪಿಎ ಅಭ್ಯರ್ಥಿ ಗೋಪಾಲ್ ಕೃಷ್ಣ ಗಾಂಧಿ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದ್ದಾರೆ.
ಇಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ನಿತೀಶ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿ ತಮ್ಮ ಅಭ್ಯರ್ಥಿಗೆ ಬೆಂಬಲ ಸೂಚಿಸುವಂತೆ ಕೋರಿದ್ದರು.
ಉಪ ರಾಷ್ಟ್ರಪತಿ ಹುದ್ದೆಗೆ ಅಭ್ಯರ್ಥಿಯನ್ನು ಸೂಚಿಸಲು ನಿನ್ನೆ ವಿರೋಧ ಪಕ್ಷಗಳು ದೆಹಲಿಯಲ್ಲಿ ಸಭೆ ಸೇರಿದ್ದವು. ನಿನ್ನೆ ನಡೆದ ಸಭೆಯಲ್ಲಿ ನಾಯಕರೆಲ್ಲಾ ಒಟ್ಟಾಗಿ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಅವರನ್ನು ಸ್ಪರ್ಧೆಗೆ ನಿಲ್ಲಿಸಲು ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ.
ನಿತೀಶ್ ಕುಮಾರ್ ಅವರು ದೂರವಾಣಿ ಮೂಲಕ ರಾಹುಲ್ ಗಾಂಧಿಗೆ, ಗೋಪಾಲಕೃಷ್ಣ ಗಾಂಧಿಗೆ ಬೆಂಬಲ ಸೂಚಿಸುವುದಾಗಿ ಹೇಳಿದ್ದಾರೆ ಎಂದು ಗೊತ್ತಾಗಿದೆ.
18 ವಿರೋಧ ಪಕ್ಷಗಳ ನಾಯಕರು ನಿನ್ನೆ ದೆಹಲಿಯಲ್ಲಿ ಸಭೆ ಸೇರಿ ಗೋಪಾಲಕೃಷ್ಣ ಗಾಂಧಿಯವರನ್ನೇ ಉಪ ರಾಷ್ಟ್ರಪತಿ ಸ್ಥಾನಕ್ಕೆ ನಿಲ್ಲಿಸುವುದಾಗಿ ಅವಿರೋಧವಾಗಿ ತೀರ್ಮಾನಕ್ಕೆ ಬಂದರು.
ನಿನ್ನೆ ನಡೆದ ಸಭೆಯಲ್ಲಿ ಶರದ್ ಯಾದವ್ ನೇತೃತ್ವದ ಸಂಯುಕ್ತ ಜನತಾ ದಳ ಮಹಾತ್ಮಾ ಗಾಂಧಿಯವರ ಮೊಮ್ಮಗ ಗೋಪಾಲಕೃಷ್ಣ ಗಾಂಧಿಯವರನ್ನು ಉಪ ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿತ್ತು